ಸೋಮವಾರ, ಜೂನ್ 14, 2010

ಗಲ್ಫ್ ಮಂಗಳೂರಿಗರ ಒಗ್ಗಟ್ಟಿನಿಂದ ಜೈಲು ವಿಮೋಚನೆಗೊಂಡ ಲೋಹಿತಾಕ್ಷ


ರಿಯಾದ್: ಕಳೆದ ಎಂಟು ತಿಂಗಳಿಂದ ತನ್ನದಲ್ಲದ ತಪ್ಪಿಗೆ ಶಿಕ್ಷೆಗೆ ಗುರಿಯಾಗಿ ಸೌದಿ ಅರೇಬಿಯಾದ ಜೈಲಿನಲ್ಲಿದ್ದ ಮಂಗಳೂರು ದೇರೆಬೈಲು ಕೊಂಚಾಡಿ ನಿವಾಸಿ ಲೋಹಿತಾಕ್ಷ ಮಂಗಳೂರು ಅಸೋಸಿಯೇಶನ್ ಫಾರ್ ಸೌದಿ ಅರೇಬಿಯಾ (MASA) ಮತ್ತು ಇತರ ಕೆಲವು ಸಮಾನ ಮನಸ್ಕ ಸಂಘಟನೆಗಳ ನೆರವಿನೊಂದಿಗೆ ಬಿಡುಗಡೆಗೊಂಡಿದ್ದಾರೆ। ಕರ್ನಾಟಕದಲ್ಲಿ ನಡೆದ ಹಾಲಪ್ಪ, ನಿತ್ಯಾನಂದರ ರಾಸಲೀಲೆಗಳ ಸುದ್ದಿಗಳ ಭರಾಟೆಯಲ್ಲಿರುವ ಕನ್ನಡ ನಾಡಿನ ಪತ್ರಿಕೆಗಳಿಗೆ ಈ ವಿಷಯ ಒಂದು ದೊಡ್ಡ ಸುದ್ಧಿಯಾಗಿ ಕಾಣಲೇ ಇಲ್ಲ।

ಗಲ್ಫ್ ನಾಡಿನಲ್ಲಿ ಅದರಲ್ಲೂ ಸೌದಿ ಅರೇಬಿಯಾದಲ್ಲಿ ಬಹಳ ಸಣ್ಣ ಪ್ರಮಾಣದಲ್ಲಿರುವ ಕನ್ನಡಿಗರ ಸಂಘಗಳು ಮಾಡಿದ ಈ ಕೆಲಸ ಅಷ್ಟು ಸುಲಭವಾಗಿ ತಳ್ಳಿಬಿಡುವಂತಹದ್ದಲ್ಲ। ಗಲ್ಫ್ ನಾಡಿನಲ್ಲಿ ಸದಾ ಒತ್ತಡದ ನಡುವೆ ಬಿಡುವಿಲ್ಲದೆ ತಮ್ಮ ಕೆಲಸ ಕಾರ್ಯಗಳಲ್ಲಿ ನಿರತರಾಗಿರುವ ವಿದೇಶಿಯರು ಸಂಘಟಿತರಾಗುವುದು ಅಷ್ಟೊಂದು ಸುಲಭವಲ್ಲ। ಹಾಗೇನಾದರೂ ಸಂಘಟಿತವಾಗಿದ್ದರೆ ಅದು ಹೆಚ್ಚಿನದಾಗಿ ಕೇರಳೀಯರು. ತಮ್ಮ ರಾಜ್ಯದ ಜನರಿಗೆ ಏನಾದರೂ ಆದರೆ ಅದಕ್ಕೆ ಅತೀ ಶೀಘ್ರ ಸ್ಪಂದಿಸುವ ಮಲಯಾಳಿ ಸಂಘಟನೆಗಳನ್ನು ನಾನು ನೋಡಿದ್ದೇನೆ.


ಸಂಘಟಿತ ಹೋರಾಟಕ್ಕೆ ಜಯ:ಅದೇ ರೀತಿ ಈಗ ಮಾಸಾದ ನೇತೃತ್ವದಲ್ಲಿ ಸೌದಿ ಅರೇಬಿಯಾ ಮತ್ತು ಯು.ಎ.ಇ. ಯ ಕೆಲವು ಸಂಘಟನೆಗಳು ಒಂದಾಗಿ ಲೋಹಿತಾಕ್ಷರನ್ನು ಬಿಡುಗಡೆ ಮಾಡಿಸಿದ್ದು ಕನ್ನಡಿಗರು ಒಂದಾದಲ್ಲಿ ಏನನ್ನೂ ಸಾಧಿಸಿಯಾರು ಎಂಬ ಸಂದೇಶವನ್ನು ಅಸಂಘಟಿತ ಗಲ್ಫ್ ಕನ್ನಡಿಗರ ಮುಂದೆ ಸಾಧಿಸಿ ತೋರಿಸುವುದರ ಜೊತೆಗೆ ಕನ್ನಡಿಗರನ್ನು ಸಂಘಟಿತರಾಗುವಂತೆ ಪ್ರೇರೇಪಿಸಿದೆ. ಅಸಲಿಗೆ ಲೋಹಿತಾಕ್ಷರನ್ನು ಜೈಲಿಗೆ ತಳ್ಳಲು ಕಾರಣವೇನು ಎಂದು ನೋಡಿದರೆ ವಿದೇಶಿಯರ ಜೊತೆ ಇಲ್ಲಿ ಎಂತಹ ಅನ್ಯಾಯಗಳು ಕೆಲವೊಮ್ಮೆ ನಡೆಯುತ್ತವೆ ಎಂಬ ವಾಸ್ತವ ವಿಚಾರವನ್ನು ನಮ್ಮ ಮುಂದಿಡುತ್ತವೆ. ಕಳೆದ ಹದಿನೈದು ವರ್ಷಗಳಿಂದ ಸೌದಿ ಅರೇಬಿಯಾದ ಬಂದರು ನಗರ ದಮ್ಮಾಮಿನಲ್ಲಿ ವೃತ್ತಿಯಲ್ಲಿ ಕ್ರೇನ್ ಚಾಲಕರಾಗಿ ದುಡಿಯುತ್ತಿರುವ ಲೋಹಿತಾಕ್ಷ ತಮ್ಮ ಕಷ್ಟದ ಕೆಲಸದ ನಡುವೆಯೂ ನಿಷ್ಠೆಯಿಂದ ಕೆಲಸ ನಿರ್ವಹಿಸಿಕೊಂಡು ಬರುತ್ತಿದ್ದರು.

ಆದರೆ ಈ ಹದಿನೈದು ವರ್ಷದಲ್ಲಿ ನಡೆಯದ ಅನೀರೀಕ್ಷಿತ ಅಪಘಾತವೊಂದು ಅವರ ಜೀವನದಲ್ಲಿ ನಡೆಯಿತು. ಅವರು ನಿಯಂತ್ರಿಸುತ್ತಿದ್ದ ಕ್ರೇನ್ ಅಕಸ್ಮಾತ್ತಾಗಿ ಅವರ ನಿಯಂತ್ರಣ ತಪ್ಪಿ ಹೊಂಡವೊಂದಕ್ಕೆ ಬಿದ್ದು ಪುಡಿಪುಡಿಯಾಯಿತು.ಏನೋ ದೇವರ ದಯೆ ಲೋಹಿತಾಕ್ಷ ಯಾವುದೇ ರೀತಿಯ ಅಪಾಯವಿಲ್ಲದೆ ಪಾರಾದರು. ಆದರೆ ಇಲ್ಲಿ ವಿಧಿ ಅವರ ಬೆನ್ನು ಬಿಡಲಿಲ್ಲ. ಮಾಲೀಕ ತನ್ನ ಕ್ರೇನ್ ಪುಡಿಯಾದ ಬಗ್ಗೆ ಇವರ ವಿರುದ್ಧವೇ ದೂರು ಕೊಟ್ಟ. ದೂರಿನ ಪ್ರಕಾರ ಹಿಂದು ಮುಂದು ನೋಡದೆ ಪೊಲೀಸರು ಇವರನ್ನು ಬಂಧಿಸಿ ಜೈಲಿಗೆ ತಳ್ಳಿದರು. ಹರಕೆಯ ಕುರಿಯಾದ ಲೋಹಿತಾಕ್ಷ:ವಾಸ್ತವವಾಗಿ ನೋಡುವುದಾದರೆ ಈ ಅಪಘಾತದಲ್ಲಿ ಲೋಹಿತಾಕ್ಷರದೇನೂ ತಪ್ಪಿಲ್ಲ. ನಡೆಯಬೇಕಾಗಿದ್ದ ಒಂದು ದುರ್ಘಟನೆ ಅನೀರೀಕ್ಷಿತವಾಗಿ ನಡೆದು ಹೋಗಿತ್ತು. ಆದರೆ ಇದರಲ್ಲಿ ಸುಮ್ಮನೆ ಲೋಹಿತಾಕ್ಷ ಬಲಿಪಶುವಾದರು. ಆನಂತರ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕ್ರೇನ್ ಮಾಲೀಕನಿಗೆ ಪರಿಹಾರವಾಗಿ ಲೋಹಿತಾಕ್ಷ ಹತ್ತು ಲಕ್ಷ ರೂಪಾಯಿ ಅಂದರೆ ಎಂಬತ್ತು ಸಾವಿರ ರಿಯಾಲ್ ಪರಿಹಾರ ಕೊಡಬೇಕೆಂದು ತೀರ್ಪಾಯಿತು. ಹೇಳಿ ಕೇಳಿ ಲೋಹಿತಾಕ್ಷ ಕಡಿಮೆ ಸಂಬಳಕ್ಕೆ ದುಡಿಯುವ ಒಬ್ಬ ಬಡ ಕಾರ್ಮಿಕ . ಎಲ್ಲಿಂದ ಹೊಂದಿಸಿಯಾರು ಅಷ್ಟೊಂದು ದೊಡ್ಡ ಮೊತ್ತವನ್ನು ?. ಅದಲ್ಲದೆ ಎಂಟು ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಇಂತಹವರಿಗೆ ಹತ್ತು ಲಕ್ಷ ರೂಪಾಯಿ ದಂಡ ಹಾಕಿದರೆ ಅವರು ಏನು ಮಾಡಿಯಾರು ? ಲೋಹಿತಾಕ್ಷ ಜೀವನದ ಆಸೆಯನ್ನೇ ಬಿಟ್ಟರು. ಒಮ್ಮೆ ಮನೆಗೆ ದೂರವಾಣಿ ಕರೆ ಮಾಡಿದ ಅವರು ತನ್ನ ಬರುವಿಕೆಯ ಬಗೆಗಿನ ಆಸೆಯನ್ನು ಬಿಟ್ಟುಬಿಡುವಂತೆ ಹೇಳಿದ್ದರಂತೆ.

ಆದರೆ ಈ ವಿಷಯ ತಿಳಿದ masa ದ ಅಧ್ಯಕ್ಷ ಮಾಧವ ಅಮೀನ್ ಜಾಗೃತರಾದರು.ಸೌದಿ ಅರೇಬಿಯಾದಲ್ಲಿ ಕನ್ನಡಿಗರ ಸೇವೆಯಲ್ಲಿ ಸದಾ ಮುಂದೆ ನಿಲ್ಲುವ ಮಾಧವ ಅಮೀನ್ ತನ್ನ ಸಂಘಟನೆಯ ಉಪಾಧ್ಯಕ್ಷರಾದ ರವಿ ಕರ್ಕೇರಾ, ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಹಾಗೂ ಪಧಾದಿಕಾರಿಗಳಾದ ಮಧುಕರ ದೇವಾಡಿಗ, ಬಾಬು ಕೋಟೆಬೆಟ್ಟು, ದಯಾನಂದ ಶ್ರೀಯಾನ್, ಅಲ್ ರಾಜಿ ಬ್ಯಾಂಕಿನ ವಸಂತ್ ಕುಮಾರ್ ಹೆಗ್ಡೆ ಅವರೊಂದಿಗೆ ಸೇರಿ ಈ ವಿಷಯದಲ್ಲಿ ಲೋಹಿತಾಕ್ಷರಿಗೆ ನೆರವಾಗಬೇಕೆಂದು ರಂಗಕ್ಕಿಳಿದರು. ಜೊತೆಗೆ ಇವರು ತಮ್ಮ ಸಂಘಟನೆಯ ಪರವಾಗಿ ಸ್ವಲ್ಪ ಮಟ್ಟಿಗಿನ ಹಣವನ್ನು ಸಂಗ್ರಹಿಸಿದರು. ಇವರ ಈ ಕೆಲಸವನ್ನು ಗಮನಿಸಿದ ಕರಾವಳಿಯ ಜನತೆ ಹಾಗೂ ಸಂಘ ಸಂಸ್ಥೆಗಳು ಇವರ ಬೆಂಬಲಕ್ಕೆ ನಿಂತು ತಮ್ಮ ಕೈಯಲ್ಲಿ ಸಾಧ್ಯವಾದಷ್ಟು ಹಣ ಸಂಗ್ರಹಿಸಿ ಕೊಟ್ಟವು. ರಿಯಾದ್ ಕರಾವಳಿ ಅಸೋಸಿಯೇಶನ್ ಅಧ್ಯಕ್ಷ ವಿಜಯ್ ರೈ, ರಿಯಾದ್ ಬಂಟರ ಸಂಘದ ಮೋಹನದಾಸ್ ಶೆಟ್ಟಿ, ಭಟ್ಕಳ ಸಮಾಜದ ಅರ್ಶದ್, ಜುಬೈರ್, ಫಯಾಜ್, ಮಂಗಳೂರಿನ ರೋಯಿಸ್ತನ್ ಪ್ರಭು ಹಾಗೂ ಇತರರು ತಮ್ಮ ಕೈಲಾದ ನೆರವು ನೀಡುವುದರ ಜೊತೆಗೆ ಈ ಕಾರ್ಯದಲ್ಲಿ ತಮ್ಮ ಸಹಕಾರವನ್ನೂ ಕೊಟ್ಟರು.

ಇತ್ತ ಸೌದಿ ಅರೇಬಿಯಾದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತಿದ್ದರೆ ಅತ್ತ ಯು.ಎ.ಇ. ಯಲ್ಲಿ ಶೋಧನ್ ಪ್ರಸಾದ್ ಈ ವಿಷಯದಲ್ಲಿ ರಂಗಕ್ಕಿಳಿದಿದ್ದರು. ಮಿತ್ರ ಅಫ್ರೋಜ್ ಅಸ್ಸಾದಿ ಜೊತೆ ನಮ್ಮ ತುಳುವೆರ್, ದೇವಾಡಿಗ ಸಂಘ ಈ ಕಾರ್ಯದಲ್ಲಿ ಇವರ ಬೆಂಬಲಕ್ಕೆ ನಿಂತವು. ಈ ಎಲ್ಲಾ ಸಹೃದಯರ ನೆರವಿನಿಂದ ಕೊನೆಗೂ ಜೂನ್ ಎಂಟರಂದು ಲೋಹಿತಾಕ್ಷರ ಬಿಡುಗಡೆಯಾಯಿತು. ಲೋಹಿತಾಕ್ಷರನ್ನು ಆದರದಿಂದ ಬರಮಾಡಿಕೊಂಡ MASA ಸಂಘಟನೆಯ ಪಧಾದಿಕಾರಿಗಳು ಅವರನ್ನು ಎರಡೇ ದಿನಗಳಲ್ಲಿ ತಾಯ್ನಾಡಾದ ಮಂಗಳೂರಿಗೆ ಬೀಳ್ಕೊಟ್ಟರು. ತನ್ನದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿದ್ದ ಒಬ್ಬ ಅನಿವಾಸಿ ಕನ್ನಡಿಗನ ನೆರವಿಗೆ ಧಾವಿಸಿದ MASA ದ ಪದಾಧಿಕಾರಿಗಳಿಗೆ ಅವರ ಬೆಂಬಲಕ್ಕೆ ನಿಂತ ಕೊಲ್ಲಿ ರಾಷ್ಟ್ರದ ಅನಿವಾಸಿ ಕನ್ನಡ ಸಂಘ ಸಂಸ್ಥೆಗಳಿಗೆ ಮತ್ತು ನಾಗರೀಕರಿಗೆ, ಈ ವಿಷಯವನ್ನು ಜನರ ಮುಂದೆ ತಂದ ದಾಯ್ಜಿ ವರ್ಲ್ಡ್ ತಂಡಕ್ಕೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಬೇಕಾದದ್ದು ಪ್ರತಿಯೊಬ್ಬ ಅನಿವಾಸಿ ಕನ್ನಡಿಗನ ಕರ್ತವ್ಯ ಎಂದರೂ ತಪ್ಪಾಗಲಾರದು.


- ಅಶ್ರಫ್ ಮಂಜ್ರಾಬಾದ್. ಸಕಲೇಶಪುರ

ಶುಕ್ರವಾರ, ಜೂನ್ 04, 2010

ನಕ್ಸಲ್ ಸಮಸ್ಯೆಗೆ ಪರಿಹಾರ ನಕ್ಸಲರ ಕೈಯಲ್ಲೇ ಇದೆ… !!!

ನಕ್ಸಲರ ಮೇಲೆ ಅನುಕಂಪ ತೋರಿಸುತ್ತಿರುವವರ ಮೇಲೆ ಕ್ರಮಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿರುವ ಬೆನ್ನಲ್ಲೇ ಈ ಬಗ್ಗೆ ವಿವಾದಗಳು ಆರಂಭವಾಗಿವೆ. ನಕ್ಸಲರ ಮೇಲೆ ಕ್ರಮಕೈಗೊಳ್ಳಲು ಮೀನಾ ಮೇಷ ಎಣಿಸುತ್ತಿರುವ ಸರ್ಕಾರ ಈಗ ಅವರ ಮೇಲೆ ಅನುಕಂಪ ಹೊಂದಿರುವವರ ಮೇಲೆ ಕ್ರಮ ಕೈಗೊಳ್ಳಲು ಹೊರಟಿದೆ. ಈ ಬಗ್ಗೆ ಈಗಾಗಲೇ ದಾಂತೆವಾಡದ ದಂಡಕಾರಣ್ಯದಲ್ಲಿ ನಕ್ಸಲರೊಂದಿಗೆ ಕೆಲವು ದಿನಗಳನ್ನು ಕಳೆದು ಅವರ ಜೀವನದ ನೈಜ ಚಿತ್ರಣಗಳು ಅವರ ಉದ್ದೇಶಗಳನ್ನು ಪುಸ್ತಕ ರೂಪದಲ್ಲಿ ಹೊರತಂದ ಬೂಕರ್ ಪ್ರಶಸ್ತಿ ವಿಜೇತೆ, ಅಂತರಾಷ್ಟ್ರೀಯ ಖ್ಯಾತಿಯ ಕೇರಳ ಮೂಲದ ಲೇಖಕಿ ಆರುಂಧತಿ ರಾಯ್ ಸರ್ಕಾರದ ವಿರುದ್ಧ ಬಹಿರಂಗವಾಗಿ ಗುಡುಗಿದ್ದಾರೆ. ಜೊತೆಗೆ ಸರ್ಕಾರ ಇದಕ್ಕಾಗಿ ನನ್ನನ್ನು ಬಂಧಿಸುವುದಾದರೆ ಬಂಧಿಸಲಿ ಎಂಬ ನೇರ ಸವಾಲನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ.



ನಕ್ಸಲರು ಯಾರೆಂದು ನೋಡಲು ಹೋದರೆ ಈ ವ್ಯವಸ್ಥೆಯ ದಬ್ಬಾಳಿಕೆಯಿಂದ ನರಳಿ ಕೊನೆಗೆ ಈ ವ್ಯವಸ್ಥೆಯ ವಿರುದ್ಧ ಹೋರಾಟಕ್ಕಾಗಿ ಮಾವೋ ಚಿಂತನೆಗೆ ಅನುಸಾರವಾಗಿ ಬಂದೂಕನ್ನು ಕೈಗೆತ್ತಿಕೊಂಡು ಸಮಾಜವನ್ನು ಸರಿದಾರಿಗೆ ತರುತ್ತೇವೆ ಎಂದು ಹೊರಟ ಶೋಷಿತ ಮತ್ತು ದಮನಿತ ಸಮುದಾಯದ ಜನರು. ಆದರೆ ಈ ಹೋರಾಟದಿಂದ ಅವರು ಸಾಧಿಸಿದ್ದೇನು ಎಂದು ನೋಡಿದರೆ ಕಂಡು ಬರುವ ಫಲಿತಾಂಶ ಮಾತ್ರ ಶೂನ್ಯ. ಆದರೆ ಇತ್ತೀಚಿನ ನಕ್ಸಲ್ ಹೋರಾಟದ ದಿಕ್ಕನ್ನು ನೋಡಿದರೆ ಎಲ್ಲೋ ಒಂದು ಕಡೆ ಈ ಹೋರಾಟದ ದಿಕ್ಕು ತಪ್ಪಿದೆ ಮತ್ತು ತಪ್ಪುತ್ತಿದೆ ಎಂದು ಎನಿಸುವುದು ಸಾಮಾನ್ಯ. ಇದಕ್ಕೆ ಇತ್ತೀಚಿಗೆ ನಕ್ಸಲ್ ಹೆಸರಿನಲ್ಲಿ ಮುಗ್ಧ ನಾಗರೀಕರ ಮೇಲೆ ನಡೆಯುತ್ತಿರುವ ದಾಳಿ ಒಂದು ಉದಾಹರಣೆ ಎನ್ನಬಹುದು. ಸಮಾಜವನ್ನು ಸರಿದಾರಿಗೆ ತರಲು ನಕ್ಸಲರು ಎನಿಸಿಕೊಂಡಂತೆ ಬಂದೂಕಿನ ಹೋರಾಟದ ಮೂಲಕ ಖಂಡಿತ ಸಾಧ್ಯವಿಲ್ಲ. ಒಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಭ್ರಷ್ಟ ವ್ಯವಸ್ಥೆಯ ವಿರುದ್ಧ ಹೋರಾಡಲು ಅನೇಕ ಮಾರ್ಗಗಳಿವೆ.


ಸಂವಿಧಾನ ಶಿಲ್ಪಿ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ತಮ್ಮ ಒಂದು ಪುಸ್ತಕದಲ್ಲಿ ಈ ರೀತಿ ಹೇಳಿದ್ದಾರೆ. Ballet is more powerful than bullet. ಅಂದರೆ ಮತಪತ್ರ (ಬ್ಯಾಲೆಟ್) ಬುಲೆಟ್ ಗಿಂತಲೂ ಶಕ್ತಿಶಾಲಿಯಾದದ್ದು ಎಂದು. ಒಂದು ಸರ್ಕಾರದ ಅಥವಾ ಒಂದು ವ್ಯವಸ್ಥೆಯ ವಿರುದ್ಧ ಹೋರಾಡಲು ಪ್ರಜಾಪ್ರಭುತ್ವದಲ್ಲಿ ಚುನಾವಣೆ ಎಂಬುವುದು ಒಂದು ಅತೀ ದೊಡ್ಡ ಅಸ್ತ್ರ . ಈ ಕಾರಣದಿಂದಲೇ ಅಂಬೇಡ್ಕರ್ ತನ್ನ ಅನುಯಾಯಿಗಳಿಗೆ ಮತ್ತು ಶೋಷಿತ ಜನರಿಗೆ ಶಿಕ್ಷಣ, ಸಂಘಟನೆ, ಹೋರಾಟ ಮತ್ತು ರಾಜ್ಯಾಧಿಕಾರದ ಕರೆಯನ್ನು ಕೊಟ್ಟರು. ಅಂಬೇಡ್ಕರ್ ಶೋಷಿತ ಸಮುದಾಯಗಳ ಎಲ್ಲಾ ಸಮಸ್ಯೆಗಳಿಗೆ ರಾಜ್ಯಾಧಿಕಾರದಿಂದ ಮಾತ್ರ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ನಂಬಿದ್ದರು.


ಇಂದಿನ ಈ ನಕ್ಸಲ್ ಹೋರಾಟಗಾರರು ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಸರಿಯಾಗಿ ಅರ್ಥೈಸಿಕೊಂಡರೆ ತಮ್ಮ ಬಂದೂಕನ್ನು ಬದಿಗಿಟ್ಟು ತಾವು ಇದುವರೆಗೆ ಬಹಿಷ್ಕರಿಸಿಕೊಂಡು ಬಂದಿದ್ದ ಚುನಾವಣೆಗಳಲ್ಲಿ ಸ್ಪರ್ಧಿಸಬಹುದು. ಹಾಗಾದಾಗ ಮಾತ್ರ ನಕ್ಸಲರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಇಲ್ಲದಿದ್ದರೆ ಅವರ ಈ ಹೋರಾಟ ಅರ್ಥಹೀನವಾಗಬಹುದು. ನಕ್ಸಲರ ವಿಚಾರಧಾರೆಗಳು ಮಾನವ ಮತ್ತು ಮಾನವೀತೆಯ ಪರ ಇದ್ದರೂ ಅವರ ಕೈಯಲ್ಲಿರುವ ಬಂದೂಕು ಅವರ ಹೋರಾಟವನ್ನು ನಿಷ್ಪ್ರಯೋಜಕಗೊಳಿಸಬಹುದು.ಈ ಕಾರಣದಿಂದಲೇ ಆರುಂಧತಿ ರಾಯ್ ತನ್ನ ಪುಸ್ತಕದಲ್ಲಿ ನಕ್ಸಲೀಯರನ್ನು ಬಂದೂಕು ಹಿಡಿದ ಆಧುನಿಕ ಗಾಂಧಿಗಳು ಎಂದು ವರ್ಣಿಸಿರಬಹುದು. ಒಂದು ಸರ್ಕಾರ ಮನಸ್ಸು ಮಾಡಿದರೆ ನಕ್ಸಲರನ್ನು ಮಣ್ಣು ಮುಕ್ಕಿಸುವುದು ಅಷ್ಟು ಕಷ್ಟವೇನಲ್ಲ. ಆದರೆ ಅದರಿಂದ ಮುಗ್ಧ ನಾಗರೀಕರ ಹತ್ಯೆ ಆಗಬಹುದು ಎಂಬ ಆಘಾತಕಾರಿ ಅಂಶವೂ ಸತ್ಯವೇ ಆಗಿದೆ. ನಕ್ಸಲರು ಸ್ವತಹ ಸಮಾಜದ ಮುಖ್ಯವಾಹಿನಿಗೆ ಬಂದು ಸರ್ಕಾರದ ವಿರುದ್ಧ ಪ್ರಜಾಪ್ರಭುತ್ವ ಮಾದರಿಯಲ್ಲಿ ಹೋರಾಟ ಮಾಡಬೇಕೇ ಹೊರತು ಕಾಡಿನೊಳಗೆ ಕುಳಿತು ಮುಗ್ಧ ನಾಗರೀಕರನ್ನು ಸರ್ಕಾರದ ವಿರುದ್ಧ ದಾಳವಾಗಿ ಬಳಸಿಕೊಳ್ಳುವುದರ ಮೂಲಕ ಅಲ್ಲ.



– ಅಶ್ರಫ್ ಮಂಜ್ರಾಬಾದ್.

ಆಶ್ರಮದಲ್ಲಿನ ಗುಂಡಿನ ದಾಳಿಯ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಲಿ.

ಬೆಂಗಳೂರಿನ ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆಶ್ರಮದಲ್ಲಿ ನಡೆದ ಗುಂಡಿನ ದಾಳಿ ಮತ್ತು ಆನಂತರ ನಡೆಯುತ್ತಿರುವ ನಾಟಕೀಯ ಬೆಳವಣಿಗೆಗಳು ಸಾರ್ವಜನಿಕ ವಲಯದಲ್ಲಿ ಒಂದು ರೀತಿಯ ಸಂಶಯದ ಮುಳ್ಳನ್ನು ಬಿತ್ತಿದೆ. ರವಿಶಂಕರ ಗುರೂಜಿ ಲಕ್ಷಾಂತರ ಭಕ್ತರನ್ನು ದೇಶ ವಿದೇಶಗಳಲ್ಲಿ ಒಳಗೊಂಡಿರುವಂತಹ ಆಧ್ಯಾತ್ಮಿಕ ಧರ್ಮಗುರುಗಳು. ಅಲ್ಲದೆ ಸದಾ ಯಾವಾಗಲೂ ಶಾಂತಿಯ ಮಂತ್ರವನ್ನು ಜಪಿಸುತ್ತಿರುವಂತಹವರು. ಅಂತಹವರ ಆಶ್ರಮದಲ್ಲಿ ನಡೆದ ಗುಂಡಿನ ದಾಳಿ ಈ ನಾಡಿನ ಶಾಂತಿಯ ಮೇಲೆ ನಡೆದ ದಾಳಿ ಎಂದೇ ಪರಿಗಣಿಸಬೇಕಾಗುತ್ತದೆ.


ಆದರೆ ಇದಕ್ಕೆ ಕಾರಣವೇನೂ ಎಂಬುವುದು ಇನ್ನೂ ಸ್ಪಷ್ಟವಾಗದಿದ್ದರೂ ಹಲವು ರೀತಿಯ ಸಂಶಯಗಳನ್ನು ಮಾತ್ರ ಹುಟ್ಟು ಹಾಕಿದೆ. ಅದೂ ಅಲ್ಲದೆ ಸ್ವಾಮೀಜಿ ಕಾರಿನಲ್ಲಿ ತೆರಳಿದ ನಂತರ ನಡೆದ ಈ ಗುಂಡು ಹಾರಾಟದ ಉದ್ದೇಶ ಸ್ವಾಮೀಜಿಯನ್ನು ಕೊಲ್ಲುವ ಉದ್ದೇಶದಿಂದ ನಡೆಸಿದ ದಾಳಿ ಅಲ್ಲ ಎಂಬುವುದು ಪೋಲೀಸರ ಪ್ರಾಥಮಿಕ ತನಿಖೆಯಿಂದ ಕಂಡು ಕೊಂಡ ಸತ್ಯ.
ಈಗಂತೂ ಸ್ವತಹ ಸ್ವಾಮೀಜಿಯೇ ಝಡ್‌ಪ್ಲಸ್ ಭದ್ರತೆ ಪಡೆಯಲು ಈ ದಾಳಿಯ ನಾಟಕ ಹಮ್ಮಿಕೊಂಡಿದ್ದರು ಎಂಬುವುದು ಕೆಲ ಮೂಲಗಳಿಂದ ತಿಳಿದು ಬರುತ್ತಿರುವುದು ಒಂದು ರೀತಿಯ ಆಶ್ಚರ್ಯಕರ ಸುದ್ಧಿ . ಹೀಗಾದರೆ ಇದು ಮಾತ್ರ ಅತ್ಯಂತ ಖಂಡನೀಯ.


ಇತ್ತೀಚಿಗೆ ಸ್ವಾಮೀಜಿಗಳಿಗೆ ಝಡ್‌ಪ್ಲಸ್ ಭದ್ರತೆ ಮತ್ತು ಕೆಂಪು ದೀಪದ ಕಾರು ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಅನೇಕ ಸ್ವಾಮೀಜಿಗಳು ಈ ರೀತಿಯ ಕೆಂಪು ದೀಪದ ಕಾರಿನಲ್ಲಿ ಓಡಾಡುತಿದ್ದಾರೆ. ಇದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ಸರ್ಕಾರ ಅದನ್ನು ಕಂಡೂ ಕಾಣದಂತೆ ಕಣ್ಣು ಮುಚ್ಚಿ ಕುಳಿತಿದೆ. ಹೀಗಿರುವಾಗ ರವಿಶಂಕರ್ ಗುರೂಜಿ ತನ್ನ ಬಹುದಿನಗಳ ಕೋರಿಕೆಯಾದ ಝಡ್‌ಪ್ಲಸ್ ಭದ್ರತೆ ಪಡೆಯಲು ಈ ರೀತಿ ದಾಳಿಯ ನಾಟಕ ನಡೆಸಿದ್ದಾರೆ ಎಂದು ಕಂಡು ಬಂದರೆ ಆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವೇ ಈ ದಾಳಿ ಬೇರೆ ಯಾರಿಂದಾದರೂ ನಡೆದಿದ್ದಲ್ಲಿ ಅವರಿಗೆ ಸೂಕ್ತ ಶಿಕ್ಷೆ ವಿಧಿಸಬೇಕು. ಈ ಎಲ್ಲಾ ವಿಷಯ ಸೂಕ್ತ ಮತ್ತು ನಿಷ್ಪಕ್ಷಪಾತ ತನಿಖೆಯಿಂದ ಮಾತ್ರ ಹೊರಬರಲು ಸಾಧ್ಯ. ಸರ್ಕಾರ ಅದನ್ನು ಆದಷ್ಟು ಬೇಗ ಮಾಡಿ ಮುಗಿಸಲಿ.


- ಅಶ್ರಫ್ ಮಂಜ್ರಾಬಾದ್.